&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&&
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕೋಟ ಚೆನ್ನಯ ಜೋಡುಕರೆ ಕಂಬಳ ಜ.28ರಂದು ಬೆಳಗ್ಗೆ 10.35ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಉದ್ಘಾಟಿಸಲಿದ್ದು, ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಮಾರ್ಗದರ್ಶಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.
ಸಾಯಂಕಾಲ 6ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಉದ್ಯಮಿ ಪ್ರಕಾಶ್ ಶೆಟ್ಟಿ ವಹಿಸಲಿದ್ದು, 30ನೇ ವರ್ಷದ ಸ್ಮರಣ ಸಂಚಿಕೆ ಬಿಡುಗಡೆಯನ್ನು ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮಾಡಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಎನ್. ಸುಧಾಕರ ಶೆಟ್ಟಿ ಪುತ್ತೂರು (ಧಾರ್ಮಿಕ ಕ್ಷೇತ್ರ), ಅಪ್ಪು ಯಾನೆ ವಲೇರಿಯನ್ ಡೇಸಾ ಅಲ್ಲಿಪಾದೆ (ಕಂಬಳ ಕ್ಷೇತ್ರ), ಆಕಾಶ್ ಐತಾಳ್ (ಕ್ರೀಡಾ ಕ್ಷೇತ್ರ), ಸತೀಶ್ ದೇವಾಡಿಗ ಅಳದಂಗಡಿ (ಹಿರಿಯ ಕಂಬಳ ಓಟಗಾರರು), ಶ್ರೀಧರ್ ಮಾರೋಡಿ (ಕಂಬಳ ಓಟಗಾರ ಕ್ರೀಡಾರತ್ನ ಪುರಸ್ಕೃತರು) ಅವರಿಗೆ ಸನ್ಮಾನ ನಡೆಯಲಿದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಮಾತನಾಡಿ ಸುಮಾರು 200ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇಟ್ಟಿದ್ದು, ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ಮಿಂಚಿನ ಓಟದ ಕೋಣ ಚೆನ್ನ ನಿಗೆ ಸನ್ಮಾನ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ನಟ ನಟಿಯರಾದ ಅದಿತಿ ಪ್ರಭುದೇವ, ಸಂಗೀತ ಶೃಂಗೇರಿ, ಸಾನಿಯ ಅಯ್ಯರ್, ದೀಪಕ್ ರೈ ಪಾಣಾಜೆ, ಸಂಗೀತ ನಿರ್ದೇಶಕ ಗುರುಕಿರಣ್, ಬಿಗ್ಬಾಸ್-9 ವಿಜೇತ ರೂಪೇಶ್ ಶೆಟ್ಟಿ, ನಿರ್ಮಾಪಕ ರವಿ ರೈ ಕಳಸ, ವಿಕ್ರಾಂತ್ ರೋಣ ಖ್ಯಾತಿಯ ವಜ್ರಧೀರ್ ಜೈನ್, ಡೈಜಿ ವರ್ಲ್ಡ ನ ವಾಲ್ಟರ್ ನಂದಳಿಕೆ ಮತ್ತಿತರರು ಭಾಗವಹಿಸದಿದ್ದಾರೆ ಎಂದರು.
ಜ.29ರಂದು ಬಹುಮಾನ ವಿತರಣೆ ನಡೆಯಲಿದ್ದು, ಅಧ್ಯಕ್ಷತೆಯನ್ನು ನಗರ ಸಭೆ ಅಧ್ಯಕ್ಷ ಜೀವಂಧರ ಜೈನ್ ವಹಿಸಲಿದ್ದು, ಸಂಸದ ನಳಿನ್ ಕುಮಾರ್, ಶಾಸಕ ಮಠಂದೂರು ಸೇರಿ ಗಣ್ಯರು ಭಾಗವಹಿಸಲಿದ್ದಾರೆ. ಹಿರಿಯ ವಿಭಾಗದಲ್ಲಿ ಪ್ರಥಮ ವಿಜೇತ ಕೋಣಗಳಿಗೆ 2 ಪವನ್ ಚಿನ್ನ (16ಗ್ರಾಂ) ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗದಲ್ಲಿ ಪ್ರಥಮ 1 ಪವನ್ ಹಾಗೂ ದ್ವಿತೀಯ 1/2 ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ವಿಜೇತ ಕೋಣಗಳ ಮಾಲಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿಚೆನ್ನಯ ಟ್ರೋಫಿಯನ್ನು ನೀಡಲಿದ್ದೇವೆಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಉಪಸ್ಥಿತರಿದ್ದರು.
^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^^
ಪುತ್ತೂರು: ಸಾಂಸ್ಕೃತಿಕವಾಗಿ ಒಂದು ಎಂಬ ಚಿಂತನೆಯಲ್ಲಿ ದೇಶ ನಿಂತಿದೆ. ವಿದೇಶಿಗರ ನಿರಂತರ ಆಕ್ರಮಣವನ್ನು ವಿರೋಧಿಸಿ ತನ್ನತನವನ್ನು ಭಾರತ ಉಳಿಸಿಕೊಂಡಿದೆ. ಗಡಿನಾಡಿ ಉತ್ಸವದ ಮೂಲಕ ಭಾಷೆ - ಪದ್ಧತಿ ಒಂದೇ ಎಂಬುದನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ. ಭಾರತದ ಸಂಸ್ಕೃತಿ ವಿಭಿನ್ನವಾಗಿದ್ದು, ದೇವರನ್ನು ಬಿಟ್ಟು ದೇಶ ಇಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಗೋಲ್ಡನ್ ಜುಬಿಲಿ ಹಾಲ್ನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪುತ್ತೂರು ನೃತ್ಯೋಪಾಸನಾ ಕಲಾ ಕೇಂದ್ರದ ವತಿಯಿಂದ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗಡಿನಾಡ ಸಂಸ್ಕೃತಿ ಉತ್ಸವ-ಗೌರವ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಶಾಸಕ ಸಂಜೀವ ಮಠಂದೂರು ಮಾತನಾಡಿ ಗಡಿನಾಡಿನಲ್ಲಿ ಸರ್ಕಾರಗಳ ಪ್ರಭಾವದಿಂದ ಅನ್ಯಯ ಭಾಷೆಗಳನ್ನು ನಾಶ ಮಾಡಲಾಗುತ್ತಿದೆ. ಕಾಸರಗೋಡು ಭಾಗದ ಕನ್ನಡ ಶಾಲೆಗಳ ಪುನಶ್ಚೇತನ ಕಾರ್ಯ ಕರ್ನಾಟಕದಿಂದ ನಡೆಯಬೇಕಾಗಿದೆ. ವ್ಯಕ್ತಿಗೆ ಬದುಕಿನಲ್ಲಿ ಕಲಿಕೆ ಎಂಬುದು ನಿರಂತರವಾಗಿರಬೇಕು. ಜೀವನ ಪೂರ್ತಿ ಸಾಧನಕನಾಗಿ ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯವಾಗಬೇಕು. ಗಡಿನಾಡಿನಲ್ಲಿದ್ದುಕೊಂಡು ಕನ್ನಡ ನಾಡಿನ ಸಂಸ್ಕೃತಿಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ನಗರ ಸಭೆ ಅಧ್ಯಕ್ಷ ಜೀವಂಧರ ಜೈನ್, ಪೂಡಾ ಅಧ್ಯಕ್ಷ ಬಾಮಿ ಅಶೋಕ ಶೆಣೈ ಉಪಸ್ಥಿತರಿದ್ದರು. ಸಿಂಚನಾ ಭಟ್ ಪ್ರಾರ್ಥಿಸಿದರು. ಉಪನ್ಯಾಸಕಿ ಮೈತ್ರಿ ಭಟ್ ಸ್ವಾಗತಿಸಿದರು. ನೃತ್ಯೋಪಾಸನಾ ಕಲಾ ಕೇಂದ್ರದ ನೃತ್ಯಗುರು ಶಾಲಿನಿ ಆತ್ಮಭೂಷಣ್ ಪ್ರಸ್ತಾವನೆಗೈದರು. ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ವಂದಿಸಿದರು. ಸ್ನಾತಕೋತ್ತರ ವಿಭಾಗ ಡೀನ್ ಡಾ. ವಿಜಯ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.
ಐವರು ಸಾಧಕರಿಗೆ ಗೌರವ:
ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್, ಪುತ್ತೂರಿನ ಚರ್ಮವಾದ್ಯ ತಯಾರಕ ರಾಜರತ್ನಂ ದೇವಾಡಿಗ, ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರಾಮಕೃಷ್ಣ ಮಯ್ಯ, ಹಿರಿಯ ಅರ್ಥಶಾಸ್ತ್ರಜ್ಞ ಡಾ.ವಿಘ್ನೇಶ್ವರ ವರ್ಮುಡಿ, ಎಡನೀರು ಉಡುಪುಮೂಲೆ ಭೂಮಿಕಾ ಪ್ರತಿಷ್ಠಾನದ ಅನುಪಮಾ ರಾಘವೇಂದ್ರ ಸೇರಿ ಐವರು ಸಾಧಕರನ್ನು ಸನ್ಮಾನಿಸಲಾಯಿತು.
**********************************************************************************************************************************************************************
30ರಂದು ತಾಲೂಕು ಮಟ್ಟದ ಸಮನ್ವಯ ಸಮಿತಿಗಳ ಸಭೆ
ಪುತ್ತೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ನೇತೃತ್ವದಲ್ಲಿ ಪುತ್ತೂರು ತಾಲೂಕು ಮಟ್ಟದ ವಿವಿಧ ಸಮನ್ವಯ ಸಮಿತಿಗಳ ಸಭೆ ಜನವರಿ 30ರಂದು ಸೋಮವಾರ ಅಪರಾಹ್ನ 2.30 ಗಂಟೆಗೆ ತಾಪಂ ಸಭಾಂಗಣದಲ್ಲಿ ನಡೆಯಲಿದೆ.
ವರದಕ್ಷಿಣೆ ನಿಷೇಧ ಕಾಯಿದೆ ಸಮಿತಿ, ಮಾದಕ ವಸ್ತು ಸೇವನೆ ನಿಷೇಧ ತಾಲೂಕು ಮಟ್ಟದ ಸಮಿತಿ, ಸ್ತ್ರೀಶಕ್ತಿ ಯೋಜನೆಯ ಸಮನ್ವಯ ಸಮಿತಿ, ಮಕ್ಕಳ ಮಾರಾಟ, ಸಾಗಾಣಿಕೆ ವಿರುದ್ಧ ಪ್ರಚಾರ ಆಂದೋಲನ ಸಮಿತಿ, ಬಾಲ್ಯ ವಿವಾಹ ನಿಷೇಧ ಸಮಿತಿ, ಭಾಗ್ಯಲಕ್ಷ್ಮೀ ಯೋಜನೆಯ ಕಾರ್ಯಪಡೆ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣಾ ಸಮಿತಿ, ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ, ವಿಕಲಚೇತನರ ತಾಲೂಕು ಮಟ್ಟದ ಸಮಿತಿ, ಮಹಿಳಾ ದೌರ್ಜನ್ಯ ತಡೆ ಸಮಿತಿ, ಮಾತೃವಂದನಾ ಸಮಿತಿ, ಭೇಟಿ ಬಚಾವೋ- ಭೇಟಿ ಪಡಾವೊ ಸಮಿತಿ ಇವುಗಳ ಸಭೆ ನಡೆಯಲಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.